Kundapura: ಕಂಡ್ಲೂರು ಅಪ್ರಾಪ್ತ ಬಾಲಕನಿಂದ ಬಲವಂತವಾಗಿ ದೇಶದ್ರೋಹದ ಹೇಳಿಕೆ ಹೇಳಿಸಿ ವಿಡಿಯೋ ಚಿತ್ರೀಕರಣ: ಇಬ್ಬರು ಆರೋಪಿಗಳ ಬಂಧನ
Monday, February 23, 2026
ಕುಂದಾಪುರ: ಉತ್ತರ ಭಾರತದ ಶ್ರಮಿಕ ಕುಟುಂಬದ ಅಪ್ರಾಪ್ತ ಬಾಲಕನಿಂದ ಬಲವಂತವಾಗಿ ದೇಶದ್ರೋಹದ ಹೇಳಿಕೆ ಹೇಳಿಸಿ, ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಪ್ರಚೋದನೆ ನೀಡಿದ ಆರೋಪದಡಿಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಶಶಾಂಕ್ ಹಾಗೂ ಪ್ರಮೋದ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಕುಂದಾಪುರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಬಾಲಕನ ತಂದೆ ನೀಡಿದ ದೂರಿನಂತೆ ಪ್ರಕರಣಕ್ಕೆ ಸಂಬಂಧಿಸಿ ಶಶಾಂಕ್ ಹಾಗೂ ಪ್ರಮೋದ್ ರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಿಡಿಯೋ ಹಂಚಿದರೆ ಕಠಿಣ ಕ್ರಮ: ಎಸ್ಪಿ ಎಚ್ಚರಿಕೆ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆ ಪ್ರಗತಿಯಲ್ಲಿರುವುದರಿಂದ, ಸಾರ್ವಜನಿಕರು ಆ ವಿಡಿಯೋವನ್ನು ಶೇರ್ ಮಾಡುವುದಾಗಲಿ, ಮರುಪೋಸ್ಟ್ ಮಾಡುವುದಾಗಲಿ ಮಾಡಬಾರದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಎಚ್ಚರಿಕೆ ನೀಡಿದ್ದಾರೆ.
ವಿಡಿಯೋವನ್ನು ಹಂಚುವ ಅಥವಾ ಪ್ರಸಾರ ಮಾಡುವವರ ವಿರುದ್ಧ ಐಟಿ ಕಾಯ್ದೆ, ಜುವೆನೈಲ್ ಜಸ್ಟಿಸ್ ಕಾಯ್ದೆ ಹಾಗೂ ಇತರೆ ಸಂಬಂಧಿತ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ. ಪೊಲೀಸರು ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಶೀಲಿಸುತ್ತಿದ್ದು, ಅಪ್ರಾಪ್ತ ಬಾಲಕನ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ. ಸಾಮಾಜಿಕ ಜಾಲತಾಣ ಬಳಕೆದಾರರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕೆಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.