COSTALNEWS | ವಿಶೇಷ ವರದಿ. ಕಂಡ್ಲೂರು ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಸ್ಥಳೀಯರ ಆಗ್ರಹ..!
Monday, July 20, 2026
ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಕುಂದಾಪುರ ತಾಲೂಕಿನ ಕಾವ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಡ್ಲೂರು ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡುವಂತೆ ಸ್ಥಳೀಯರು ಹಾಗೂ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.
ಸ್ಥಳೀಯರ ಪ್ರಕಾರ, ಈ ಕುರಿತು ಗ್ರಾಮಸಭೆ ಹಾಗೂ ವಿವಿಧ ಕುಂದುಕೊರತೆ ಸಭೆಗಳಲ್ಲಿ ಹಲವು ಬಾರಿ ಮನವಿ ಸಲ್ಲಿಸಿದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಆಡಳಿತದ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರ ಆಕ್ರೋಶ.
ಕಂಡ್ಲೂರು ಬಸ್ ನಿಲ್ದಾಣದ ಸುತ್ತಮುತ್ತ ಗ್ರಾಮ ಪಂಚಾಯತ್ಗೆ ಸೇರಿದ ಬಾಡಿಗೆ ಅಂಗಡಿಗಳು, ರಿಕ್ಷಾ ನಿಲ್ದಾಣ ಹಾಗೂ ವಾರದ ಸಂತೆ ಮಾರುಕಟ್ಟೆ ಕಾರ್ಯನಿರ್ವಹಿಸುತ್ತಿದ್ದು, ಪ್ರತಿದಿನ ನೂರಾರು ಜನರು ಈ ಪ್ರದೇಶಕ್ಕೆ ಆಗಮಿಸುತ್ತಾರೆ. ಆದರೆ ಸಾರ್ವಜನಿಕ ಶೌಚಾಲಯದ ಕೊರತೆಯಿಂದ ಮಹಿಳೆಯರು, ವೃದ್ಧರು ಹಾಗೂ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿ ಬಾಬು ತಿಳಿಸಿದ್ದಾರೆ.
ವಿಶೇಷವಾಗಿ ದೂರದ ಊರುಗಳಿಂದ ಬರುವ ಮಹಿಳೆಯರಿಗೆ ಶೌಚಾಲಯದ ವ್ಯವಸ್ಥೆ ಇಲ್ಲದಿರುವುದು ಸಂಕಷ್ಟಕ್ಕೆ ಕಾರಣವಾಗಿದ್ದು, ಈ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸಬೇಕು ಎಂದು ರಿಕ್ಷಾ ಚಾಲಕರು ಕೂಡ ಒತ್ತಾಯಿಸಿದ್ದಾರೆ.
ಸ್ಥಳೀಯ ಗಂಡಸರು ಬಸ್ ನಿಲ್ದಾಣದ ಹಿಂದುಗಡೆ ಕೋಳಿ ಅಂಗಡಿ ಎದುರುಗಡೆ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ ಒಟ್ಟಾರೆಯಾಗಿ
ಸಾರ್ವಜನಿಕ ಆರೋಗ್ಯ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಬೇಕಾದ ಸ್ಥಳದಲ್ಲೇ ಮೂಲಭೂತ ಸೌಲಭ್ಯಗಳ ಕೊರತೆ ಕಂಡುಬರುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಶಾಸಕರು ತಕ್ಷಣ ಗಮನಹರಿಸಿ ಕಂಡ್ಲೂರು ಬಸ್ ನಿಲ್ದಾಣದ ಬಳಿ ಸುಸಜ್ಜಿತ ಸಾರ್ವಜನಿಕ ಶೌಚಾಲಯ ನಿರ್ಮಿಸಿ ಜನರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.
ವರದಿ: ಗೋಪಾಲ್ ಕವ್ರಾಡಿ , ಸುರೇಶ್ ಅಮಾಸೆ ಬೈಲು ಕೋಸ್ಟಲ್ ನ್ಯೂಸ್ ಕುಂದಾಪುರ