udupi ಕುಂದಾಪುರ ಪುರಸಭೆ ವ್ಯಾಪ್ತಿಯ ರಿಂಗ್ ರೋಡ್ನಲ್ಲಿ ಸರಾಯಿ ಬಾಟಲಿ ಹಾವಳಿ
Sunday, July 12, 2026
ಬೆಳಗಿನ ವೇಳೆಯಲ್ಲಿ ಸುಂದರವಾಗಿ ಕಾಣುವ ಈ ರಸ್ತೆ, ರಾತ್ರಿ ಕತ್ತಲೆ ಆವರಿಸಿದ ಬಳಿಕ ಮದ್ಯ ಸೇವನೆ ಮಾಡುವವರ ತಾಣವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ರಸ್ತೆಯ ಬದಿಯಲ್ಲಿ ಸರಾಯಿ ಬಾಟಲಿಗಳು ಬಿದ್ದಿರುವ ದೃಶ್ಯಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ.
ಈ ಕುರಿತು ಪುರಸಭೆ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತರಲಾಗಿದ್ದರೂ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಕ್ಯಾರೆ ಎನ್ನದೆ ಮೌನವಾಗಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ನಾಗರಿಕರು ಹೇಳುತ್ತಿದ್ದಾರೆ.
ಸರಕಾರ ಸಾರ್ವಜನಿಕರ ಅನುಕೂಲಕ್ಕಾಗಿ ಕೋಟಿ ಗಟ್ಟಲೆ ಹಣ ಬಿಡುಗಡೆ ಮಾಡಿ ರಸ್ತೆ ನಿರ್ಮಾಣ ಮಾಡಿದ್ದರೂ, ರಾತ್ರಿ ವೇಳೆ ಸಮರ್ಪಕ ವಿದ್ಯುತ್ ದೀಪಗಳ ಕೊರತೆ, ಇಂಟರ್ಲಾಕ್ ಕಾಮಗಾರಿಯ ದೋಷಗಳು ಸೇರಿದಂತೆ ಹಲವು ಸಮಸ್ಯೆಗಳು ಇನ್ನೂ ಮುಂದುವರಿದಿವೆ ಎಂಬ ಆರೋಪವೂ ಕೇಳಿಬಂದಿದೆ.
ಈ ಎಲ್ಲ ದೋಷಗಳಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಮೌನವಾಗಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಪ್ರಜ್ಞಾವಂತ ನಾಗರಿಕರು ಅಭಿಪ್ರಾಯಪಟ್ಟಿದ್ದಾರೆ.
ಇನ್ನಾದರೂ ಸರಕಾರದ ಹಣ ದುರುಪಯೋಗವಾಗದಂತೆ ನೋಡಿಕೊಳ್ಳಬೇಕು. ರಸ್ತೆ ಸುರಕ್ಷತೆ, ಸ್ವಚ್ಛತೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.